08/08/2026

ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಪ.ಗೋ.ಪ್ರಶಸ್ತಿ ಪ್ರದಾನ

0

ಮಂಗಳೂರು: ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ ಎಂದು ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ.ಗೋ. ಪ್ರಶಸ್ತಿಯನ್ನು ಪತ್ರಕರ್ತ ಪ್ರದೀಶ್.ಎಚ್.ಮರೋಡಿ ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು. ಪತ್ರಕರ್ತರು ಮಾಡುವ ಪ್ರತಿಯೊಂದು ವರದಿಗಳು ನಂಬಿಕೆ ಮತ್ತು ವಿಶ್ವಾಸದಿಂದ ಕೂಡಿರಬೇಕು. ಪ.ಗೊ ಅವರು ಪತ್ರಕರ್ತರಿಗೆ ಆದರ್ಶಪ್ರಾಯರಾಗಿದ್ದರು. ಅವರ ಹೆಸರಿನಲ್ಲಿ ನೀಡುವ ಈ ಪ್ರಶಸ್ತಿ ಗ್ರಾಮೀಣ ಬದುಕಿನ ಬಗ್ಗೆ ಕನ್ನಡಿ ಹಿಡಿಯಲು ಪತ್ರಕರ್ತರಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ವಿಭಿನ್ನವಾಗಿ ಮತ್ತು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರದೀಶ್.ಎಚ್.ಮರೋಡಿ ಪ.ಗೋ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಪಡೆದಿರುವುದು ಜೀವನದ ಅವಿಸ್ಮರಣೀಯ ಕ್ಷಣ ಎಂದು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರ ಶೇಖರಯ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಂದ್ರಶೇಖರಯ್ಯ ಅವರು 50 ಸಾವಿರ ರೂ. ಹಸ್ತಾಂತರಿಸಿದರು. ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಪುತ್ತೂರು ಡಾ.ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ.ಸುಂದರ ಕೇನಾಜೆ, ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ. ಮಾತನಾಡಿದರು.

ಪದ್ಯಾಣ ಗೋಪಾಲಕೃಷ್ಣ ಅವರ ಪುತ್ರ ಪದ್ಯಾಣ ರಾಮಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಕಾರ್ಯಕಾರಿ ಸಮಿತಿ ಸದಸ್ಯೆ ಸತ್ಯವತಿ ಪ್ರಶಸ್ತಿ ವಿಜೇತರ ಪರಿಚಯ ಮಾಡಿದರು.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು.


Leave a Reply

Your email address will not be published. Required fields are marked *

You may have missed