08/08/2026

ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನ ಮಳೆ

0

ಶಿವರಾತ್ರಿ ಆದ್ಮೇಲೆ ಚಳಿಗಾಲ ಶಿವಶಿವ ಅನ್ಕೊಂಡು ಓಡಿಹೋಗತ್ತೆ ಅನ್ನೋ ಮಾತಿದೆ. ಆದ್ರೆ ಬೆಂಗಳೂರಲ್ಲಿ ಆದ್ಯಾಕೋ ಇನ್ನು ಚಳಿ ಎಫೆಕ್ಟ್ ಕಮ್ಮಿಯಾಗಿಲ್ಲ. ಹೀಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ‌.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ‌. ದಕ್ಷಿಣ ಒಳನಾಡು, ಕರಾವಳಿಯಲ್ಲಿ ಹೆಚ್ಚು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇಂದು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ‌.

ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಬಗ್ಗೆ ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ ಎಂದು ತಿಳಿಸಿದೆ.

ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರುತ್ತೆ. ಇಂದು ಮಾತ್ರ ಬೆಂಗಳೂರಿನ ಕೆಲ ಭಾಗದಲ್ಲಿ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.


Leave a Reply

Your email address will not be published. Required fields are marked *

You may have missed